ಸಾರಾಂಶ
ಬೆಂಗಳೂರು : ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ಎಂಜಿನಿಯರಿಂಗ್ ಪದವೀಧರ ಪೇಯಿಂಗ್ ಗೆಸ್ಟ್(ಪಿಜಿ) ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ ಮೂಲದ ಅರುಣ್ ಕುಮಾರ್ ಪಾಟೀಲ್ (28) ಆತ್ಮಹತ್ಯೆ ಶರಣಾದವರು. ವೈಟ್ಫೀಲ್ಡ್ನ ಅಂಬೇಡ್ಕರ್ ನಗರದ ಶಿವ ಪಿಜಿಯಲ್ಲಿ ಗುರುವಾರ ಬೆಳಗ್ಗೆ ಸುಮಾರು 10.30ಕ್ಕೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರುಣ್ ಕುಮಾರ್ ಪಾಟೀಲ್ ಉದ್ಯೋಗ ಅರಸಿ ಬುಧವಾರ ಬೆಂಗಳೂರಿಗೆ ಬಂದಿದ್ದರು. ವೈಟ್ಫೀಲ್ಡ್ನ ಅಂಬೇಡ್ಕರ್ ನಗರದ ಶಿವ ಪಿಜಿಯಲ್ಲಿ ಉಳಿದುಕೊಂಡಿದ್ದರು. ಗುರುವಾರ ಬೆಳಗ್ಗೆ ಮೊಬೈಲ್ ಹಾಗೂ ಬ್ಯಾಗ್ ಅನ್ನು ಕೊಠಡಿಯಲ್ಲಿ ಇರಿಸಿ ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋರಾದ ಶಬ್ಧ ಕೇಳಿ ಸ್ಥಳೀಯರು, ಪಿಜಿ ಮಾಲೀಕರು ಹೊರಗಡೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದೇ ಮರಣಪತ್ರವೂ ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೋಷಕರಿಗೆ ಒಪ್ಪಿಸಲಾಗಿದೆ. ವೈಟ್ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.