ನೇಹಾ ಹತ್ಯೆ ನಡೆದ ಸ್ಥಳ ಮಹಜರು ಮಾಡಿದ ಸಿಐಡಿ

| Published : Apr 25 2024, 01:05 AM IST

ಸಾರಾಂಶ

ಇಲ್ಲಿನ ಬಿವಿಬಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತನಿಖೆಯನ್ನು ಚುರುಕುಗೊಳಿಸಿದೆ. ಹತ್ಯೆ ಮಾಡಿದ ಆರೋಪಿ ಫಯಾಜ್‌ನನ್ನು ಧಾರವಾಡ ಕೇಂದ್ರ ಕಾರಾಗೃಹದಿಂದ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಬುಧವಾರ ಕೃತ್ಯ ನಡೆದ ಸ್ಥಳಕ್ಕೆ ಕರೆ ತಂದು ಮಹಜರು ಮಾಡಿದರು.

- ಆರೋಪಿಯನ್ನು 6 ದಿನ ಸಿಐಡಿ ವಶಕ್ಕೆ ನೀಡಿದ ಕೋರ್ಟ್‌

- ಫಯಾಜ್‌ನ ಊರು ಮುನವಳ್ಳಿಗೂ ತೆರಳಿ ಮಾಹಿತಿ ಕಲೆ ಹಾಕಿದ ತಂಡ

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಇಲ್ಲಿನ ಬಿವಿಬಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತನಿಖೆಯನ್ನು ಚುರುಕುಗೊಳಿಸಿದೆ. ಹತ್ಯೆ ಮಾಡಿದ ಆರೋಪಿ ಫಯಾಜ್‌ನನ್ನು ಧಾರವಾಡ ಕೇಂದ್ರ ಕಾರಾಗೃಹದಿಂದ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಬುಧವಾರ ಕೃತ್ಯ ನಡೆದ ಸ್ಥಳಕ್ಕೆ ಕರೆ ತಂದು ಮಹಜರು ಮಾಡಿದರು.

ಇದಕ್ಕೂ ಮೊದಲು, ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್‌ನನ್ನು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಹುಬ್ಬಳ್ಳಿ ಜೆಎಂಎಫ್‌ಸಿ ಕೋರ್ಟ್‌ಗೆ ತನಿಖಾಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಫಯಾಜ್‌ನನ್ನು ಆರು ದಿನ ಸಿಐಡಿ ಅಧಿಕಾರಿಗಳ ವಶಕ್ಕೆ ನೀಡಿ ಆದೇಶ ನೀಡಿದೆ. ಬಳಿಕ ಸಿಐಡಿ ಅಧಿಕಾರಿಗಳು ಫಯಾಜ್‌ನನ್ನು ಧಾರವಾಡದ ಡಿಎಆರ್ ಮೈದಾನದ ಹತ್ತಿರ ಇರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿದರು.

ಬಳಿಕ, ಅಧಿಕಾರಿಗಳ ತಂಡ ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದ ಫಯಾಜ್‌ನನ್ನು ವಶಕ್ಕೆ ಪಡೆದು ಅಲ್ಲಿಂದ ನೇರವಾಗಿ ಅಪರಾಧ ನಡೆದ ಸ್ಥಳವಾದ ಬಿವಿಬಿ ಕಾಲೇಜ್‌ ಕ್ಯಾಂಪಸ್‌ಗೆ ಕರೆ ತಂದು ಮಹಜರು ನಡೆಸಿತು. ಸಿಐಡಿಯ ಇನ್ನೊಂದು ತಂಡ ಆರೋಪಿಯ ಊರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮಕ್ಕೆ ತೆರಳಿ ಮಾಹಿತಿ ಕಲೆ ಹಾಕಿದೆ.

ನೇಹಾಳನ್ನು ಕೊಲೆ ಮಾಡುವ ಉದ್ದೇಶ ಹೊಂದಿದ್ದ ಆರೋಪಿ ಫಯಾಜ್ 5 ದಿನ ಮೊದಲೇ ಚಾಕು ಖರೀದಿಸಿದ್ದ. ನೇಹಾ ಜತೆ ಕೆಲ ವಾರಗಳಿಂದ ಸಂಪರ್ಕ ಕಡಿತಗೊಂಡಿದ್ದರಿಂದ ಹತಾಶನಾಗಿ ದ್ವೇಷ ಸಾಧಿಸುತ್ತಿದ್ದ. ಧಾರವಾಡದಲ್ಲಿ ಚಾಕು ಖರೀದಿಸಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಕಾಲೇಜಿಗೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏಪ್ರಿಲ್ 18ರಂದು ಕಾಲೇಜಿಗೆ ಬಂದಿದ್ದ ಫಯಾಜ್, ಬೈಕ್‌ ಹ್ಯಾಂಡಲ್ ಲಾಕ್ ಮಾಡದೆ, ಕೃತ್ಯ ಮುಗಿಸಿ ಪರಾರಿಯಾಗಲು ಯೋಜಿಸಿದ್ದ. ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಲು ಸಾಧ್ಯವಾಗದಿದ್ದಾಗ ಕಾಲೇಜಿನ ಮುಖ್ಯದ್ವಾರದ ಮೂಲಕ ಪರಾರಿಯಾಗಲು ಯತ್ನಿಸಿದ್ದ. ಆ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸ್ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.