ಜೆಪಿ ನಡ್ದಾ, ಜಾಧವ್ ಸುಧೀರ್ಘ ಮಾತುಕತೆ

| Published : Apr 28 2024, 01:26 AM IST

ಸಾರಾಂಶ

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಲ್ಬುರ್ಗಿಯ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರಸ್ಪರ ಸುದೀರ್ಘ ಸಮಾಲೋಚನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಲ್ಬುರ್ಗಿಯ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರಸ್ಪರ ಸುದೀರ್ಘ ಸಮಾಲೋಚನೆ ನಡೆಸಿದರು.

ನಗರಕ್ಕೆ ಆಗಮಿಸಿದ ನಡ್ಡಾ ಅವರೊಂದಿಗೆ ವಿಧಾನಪರಿಷತ್ತಿನ ಸದಸ್ಯರಾದ ಬಿ.ಜಿ. ಪಾಟೀಲ್ ಅವರ ಮನೆಯಲ್ಲಿ ಚುನಾವಣೆಯ ತಂತ್ರಗಾರಿಕೆ ಮತ್ತು ಕೈಗೊಳ್ಳಬೇಕಾದ ಕಾರ್ಯಕ್ರಮಗಳ ರೂಪರೇಶೆಗಳ ಬಗ್ಗೆ ಚರ್ಚೆ ನಡೆಸಿದರು.

ಚುನಾವಣೆಯ ಇವರೆಗಿನ ಪ್ರಗತಿಯ ವರದಿಯನ್ನು ಪಡೆದ ಅವರು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳನ್ನು ಕೂಡ ಚರ್ಚಿಸಿದರು. ಕಲ್ಬುರ್ಗಿಯಲ್ಲಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಿದರೆ ಭವಿಷ್ಯದಲ್ಲಿ ಉತ್ತಮ ಸ್ಥಾನಮಾನಗಳು ಗೌರವಗಳು ಲಭಿಸಲಿದೆ ಎಂಬ ಸೂಚನೆಯನ್ನು ನೀಡಿದರು. ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಅವರು ಕಿವಿಮಾತು ಹೇಳಿದರು. ಚುನಾವಣಾ ಘೋಷಣೆಯ ನಂತರ ಕೈಗೊಂಡ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಹಾಕಿಕೊಂಡ ಕಾರ್ಯಕ್ರಮಗಳ ಬಗ್ಗೆ ಜಾಧವ್ ರಾಷ್ಟ್ರೀಯ ಅಧ್ಯಕ್ಷರಿಗೆ ಮಾಹಿತಿ ನೀಡಿದರು.

ಬಿಜೆಪಿಯ ಕಾರ್ಯಕರ್ತರ ಕಾರ್ಯ ಶೈಲಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ನಡ್ಡಾ ಅವರು ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನು ಮಾಡಲು ಎಲ್ಲರೂ ಅರ್ಪಣಾ ಮನೋಭಾವದಿಂದ ಕೆಲಸ ಮಾಡಲು ಸೂಚನೆ ನೀಡಿದರು. ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಮತ್ತು ಮೋದಿ ಗ್ಯಾರಂಟಿಗಳನ್ನು ಮನೆಮನೆಗೆ ತಲುಪಿಸುವ ದೊಡ್ಡ ಜವಾಬ್ದಾರಿ ಕಾರ್ಯಕರ್ತರ ಮೇಲಿದ್ದು ಆ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದು ನಡ್ಡಾ ಸಲಹೆ ನೀಡಿದರು.