ಸಿಇಟಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಆಗ್ರಹ

| Published : Apr 25 2024, 01:07 AM IST

ಸಿಇಟಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಔಟ್ ಆಫ್ ಸಿಲಬಸ್ ಪ್ರಶ್ನೆಗಳ ವೈಖರಿಯಿಂದ ಸಂಪೂರ್ಣ ಗೊಂದಲಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳಿಗೆ ತಕ್ಷಣ ಮತ್ತೆ ಮರು ಪರೀಕ್ಷೆ ಮಾಡುವಂತೆ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ಕೊಡಗು ಜಿಲ್ಲಾ ಸಂಚಾಲಕ ಎನ್.ಎನ್. ಶಂಭುಲಿಂಗಪ್ಪ ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ ಈ ತಿಂಗಳ 18 ಮತ್ತು 19ರಂದು ನಡೆದ ಸಿಇಟಿ ಪರೀಕ್ಷೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಸಂಪೂರ್ಣ ಗೊಂದಲಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳಿಗೆ ತಕ್ಷಣ ಮತ್ತೆ ಮರು ಪರೀಕ್ಷೆ ಮಾಡುವಂತೆ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ಕೊಡಗು ಜಿಲ್ಲಾ ಸಂಚಾಲಕ ಎನ್.ಎನ್. ಶಂಭುಲಿಂಗಪ್ಪ ಒತ್ತಾಯಿಸಿದ್ದಾರೆ.

ಇಲ್ಲಿನ ವಿವೇಕಾನಂದ ಪಿಯು ಕಾಲೇಜು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಾಲಿನಲ್ಲಿ ರಾಜ್ಯದ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆದಿದ್ದು, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಿತಶಾಸ್ತ್ರ ವಿಷಯಗಳಲ್ಲಿ ಶೇ.53ರಷ್ಟು ಹೊರಪಠ್ಯದ (ಔಟ್ ಆಫ್ ಸಿಲಬಸ್) ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೆ ಉತ್ತರ ಬರೆಯಲು ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಹೊರ ಪಠ್ಯದಿಂದ ಹೆಚ್ಚು ಪ್ರಶ್ನೆಗಳನ್ನು ಪರೀಕ್ಷೆಗೆ ನೀಡಲಾಗಿದ್ದು ಇದರಿಂದ ವಿದ್ಯಾರ್ಥಿಗಳು ಸಂಪೂರ್ಣ ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಮಂಡಳಿ ಮತ್ತು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತವಾದ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕಾಗಿದೆ ಎಂದು ಶಂಭುಲಿಂಗಪ್ಪ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರ ಮತ್ತು ಪರೀಕ್ಷಾ ಮಂಡಳಿಯ ಹೊಂದಿರುವ ಮಹತ್ವದ ಸವಾಲಾಗಿದ್ದು ತಕ್ಷಣ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಆ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರ ಗೊಂದಲ ನಿವಾರಣೆಯಾಗಬೇಕು ಪುನಃ ಪರೀಕ್ಷೆ ನಡೆಸುವುದು ಸೂಕ್ತ ಅಥವಾ ಕೃಪಾಂಕ ನೀಡುವುದು ಉತ್ತಮ ಮಾರ್ಗವಾಗಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿವೇಕಾನಂದ ಪಿಯು ಕಾಲೇಜು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ವಿಕ್ರಂ ಮಾತನಾಡಿ, ಪಿಯು ಮಂಡಳಿ ಮತ್ತು ಪರೀಕ್ಷಾ ಮಂಡಳಿ ನಡುವೆ ಕಂಡು ಬಂದ ಮಾಹಿತಿ ಕೊರತೆ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು. ಅವರು ಪ್ರಶ್ನೆ ಪತ್ರಿಕೆಯಲ್ಲಿ ಕಂಡು ಬಂದ ಗೊತ್ತಿಲ್ಲದ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯಬೇಕಾದ ಪರಿಸ್ಥಿತಿಗೆ ಬಂದಿರುವುದು ವಿಷಾದನೀಯ ಎಂದರು.

ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಮಟ್ಟದ ಕೋಚಿಂಗ್ ಪಡೆದಿದ್ದು ಈ ಗೊಂದಲದಿಂದ ಮಕ್ಕಳ ಭವಿಷ್ಯ ಏರುಪೇರಾಗಲಿದೆ. ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲ ಕ್ಲಾರಾ ರೇಷ್ಮಾ , ವಾಣಿಜ್ಯ ವಿಭಾಗ ಮುಖ್ಯಸ್ಥ ಸ್ವಾಮಿ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ನಮಿತಾ, ಗಣಿತಶಾಸ್ತ್ರ ಮುಖ್ಯಸ್ಥ ಸೌಮ್ಯ ಇದ್ದರು.