ಸಾರಾಂಶ
ಬೇವಿನಹಳ್ಳಿ ಮತ್ತು ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಕನ್ನಡಪ್ರಭ ವಾರ್ತೆ ಶಹಾಪುರ
ತಾಲೂಕಿನ ಬೇವಿನಹಳ್ಳಿ ಮತ್ತು ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಆಟೋ ಪಲ್ಟಿಯಾಗಿ ಸ್ಥಳದಲ್ಲೇ ದೇವಕೆಮ್ಮ ನಾಯ್ಕೋಡಿ (60) ಎಂಬುವರು ಮೃತಪಟ್ಟಿದ್ದಾರೆ. ಇವರು ಟಂಟಂ ಆಟೋದಲ್ಲಿ ಇಬ್ರಾಹಿಂಪುರ್ ಗ್ರಾಮದ ಅಬ್ದುಲ್ ಬಾಷಾ ದರ್ಗಾಕ್ಕೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಆಟೋದಲ್ಲಿದ್ದ 8 ಜನರಲ್ಲಿ ಐವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಮತ್ತು ಯಾದಗಿರಿಗೆ ಕಳುಹಿಸಿ ಕೊಡಲಾಗಿದೆ.
ಬೀದರ್-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ನಗರದ ಹೊರವಲಯದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರ ಕಾರ್ ಮತ್ತು ಟಿವಿಎಸ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಭೀಮರಾಯ ತಂದೆ ಹಣಮಂತ (55) ಮಡ್ನಾಳ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಪೊಲೀಸ್ ಇನ್ಸ್ ಪೆಕ್ಟರ್ ಎಸ್.ಎಂ. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದಲ್ಲಿ ಇತ್ತೀಚಿಗೆ ಅಪಘಾತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಕೆಲಸದ ನಿಮಿತ್ತ ಬೇರೆ ಕಡೆ ಹೋದವರು ಮನೆಗೆ ನೆಮ್ಮದಿಯಾಗಿ ಮುಟ್ಟುತ್ತೇವೆ ಎನ್ನುವ ಭರವಸೆ ಇಲ್ಲದಂತಾಗಿದೆ. ಇಲ್ಲಿ ಸಂಚಾರಿ ಪೊಲೀಸ್ ಠಾಣೆ ಮಂಜೂರು ಮಾಡುವುದು ಅತ್ಯವಶ್ಯ.- ಬಸವರಾಜ, ನಗರದ ಬೈಕ್ ಸವಾರ.